ಗೋ ಕಳ್ಳರಿಗೆ ಗುಂಡೇಟಿನ ಎಚ್ಚರಿಕೆ ಕೊಟ್ಟ ಸಚಿವ: ಮಂಕಾಳ ವೈದ್ಯ

ಬೆಂಗಳೂರು: ಗೋ ಕಳ್ಳರಿಗೆ ನಡುರಸ್ತೆಯಲ್ಲೇ ಗುಂಡೇಟು ಕೊಡಲು ಆದೇಶಿಸುವೆ ಎಂದು ಸಚಿವ ಮಂಕಾಳ ವೈದ್ಯ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗೋ ಕಳ್ಳತನ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಗೋಕಳ್ಳರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಆದೇಶ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಚಿವರ ಹೇಳಿಕೆ ಪರ ಹಾಗೂ ವಿರುದ್ಧವಾದ ಆಯಾಮದಲ್ಲಿ ಚರ್ಚೆ ನಡೆಯುತ್ತಿದೆ. ಈ ನಡುವೆ ರಾಜ್ಯದಲ್ಲಿ ಕಳೆದ 2 ವರ್ಷಳಲ್ಲಿ ಗೋ ಕಳ್ಳತನ ಎಷ್ಟು ಪ್ರಮಾಣದಲ್ಲಿ ನಡೆದಿದೆ ಎಂಬುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಹಲವು ಪ್ರಕರಣಗಳನ್ನು ದಾಖಲು ಮಾಡಲಾಗ್ತಿದೆ. ಇದರ ನಡುವೆ ಗೋಕಳ್ಳತನ ಪ್ರಕರಣವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.