ದೇಶ
Trending

ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇಯಲ್ಲಿ ಬೈಕ್, ರಿಕ್ಷಾ, ಟ್ರ್ಯಾಕ್ಟರ್ ಸಂಚಾರ ನಿಷೇಧ

ನೂತನ ಚೆನೈ ಬೆಂಗಳೂರು ಎಕ್ಸ್​ಪ್ರೆಸ್ ವೇಯಲ್ಲಿ (Bengaluru-Chennai Expressway)  ಅಪಘಾತಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಕೋಲಾರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್​ಗಳ ಸಂಚಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಈ ಹೆದ್ದಾರಿಯಲ್ಲಿ ಹತ್ತಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವ ಕಾರಣ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.ಜೂನ್ 9 ರಂದು ಸೋಮವಾರ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್​​ ಬಳಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ರಾಜಸ್ಥಾನ ಮೂಲದ ಅಶೋಕ್ (28) ಮತ್ತು ಮೋಹನ್ ಲಾಲ್ (32) ಮೃತಪಟ್ಟಿದ್ದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಪ್ರವೇಶ ನಿಷೇಧಿಸಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2025ರ ಮಾರ್ಚ್​ನಲ್ಲೇ ಸುತ್ತೋಲೆ ಹೊರಡಿಸಿತ್ತು. ಆದಾಗ್ಯೂ, ದ್ವಿಚಕ್ರ ವಾಹನ ಸಂಚಾರ ಎಗ್ಗಿಲ್ಲದೆ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾ ಪೊಲೀಸರು ಕೂಡ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.ಕೋಲಾರದ ಬಂಗಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಾರ್ಚ್​ ತಿಂಗಳಲ್ಲಿ ದ್ವಿಚಕ್ರ ವಾಹನವೊಂದು ರಾಂಗ್ ಸೈಡ್​​ನಿಂದ ಬಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ್ದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಆ ನಂತರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿತ್ತು.

ಕಾನೂನಿನ ಪ್ರಕಾರ, ಅತಿ ವೇಗದ ಪ್ರಯಾಣಕ್ಕಾಗಿ ವಿನ್ಯಾಸಗೊಳಿಸಲಾಗಿರುವ ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಒಟ್ಟು 260 ಕಿಲೋಮೀಟರ್ ಉದ್ದವಿದ್ದು, ಕರ್ನಾಟಕ ವ್ಯಾಪ್ತಿಯಲ್ಲಿ ಈಗಾಗಲೇ ಸಂಚಾರಕ್ಕೆ ಮುಕ್ತವಾಗಿದೆ. ಈ ಹೆದ್ದಾರಿಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಮೂಲಕ ಹಾದುಹೋಗುತ್ತದೆ. ಹೈವೇಯ ಉಳಿದ ಭಾಗದ ಕಾಮಗಾರಿ ಈ ವರ್ಷದ ಕೊನೆಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.

ದಕ್ಷಿಣ ಭಾರತದ ಮೊದಲ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಎಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಒಟ್ಟು 17,900 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಇದು ಬೆಂಗಳೂರು ಮತ್ತು ಚೆನ್ನೈ ನಡುವಣ ಪ್ರಯಾಣದ ಸಮಯವನ್ನು ಏಳು ಗಂಟೆಗಳಿಂದ ಕೇವಲ ಮೂರು ಗಂಟೆಗೆ ಇಳಿಸುವ ಗುರಿ ಹೊಂದಿದೆ.

Related Articles

Leave a Reply

Your email address will not be published. Required fields are marked *

Back to top button