
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ (CT Ravi) ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಇಂದು (ಮೇ 02) ವಜಾ ಮಾಡಿದೆ. ಇದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದರು. ಇದೇ ವೇಳೆ ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಸದನದ ಸದಸ್ಯರಿಗೆ ನೀಡಿದ ರಕ್ಷಣೆ ಏನು? ಸಭಾಪತಿಗಳು ಪೀಠದಲ್ಲಿ ಇಲ್ಲದೆ ಇದ್ದ ಸಂದರ್ಭದಲ್ಲಿಯೂ ಅದು ಅನ್ವಯವಾಗುತ್ತದೆಯೇ? ಶಾಸಕಾಂಗವು ಈ ಪ್ರಕರಣದ ಬಗ್ಗೆ ಗಮನಹರಿಸಿ ತೀರ್ಪು ನೀಡಿದ ನಂತರ, ಸಿಐಡಿಯಂತಹ ಸಂಸ್ಥೆ ಇನ್ನೂ ತನಿಖೆ ನಡೆಸಬಹುದೇ ಎಂದು ಪ್ರಭುಲಿಂಗ ನಾವದಗಿ ಪ್ರಶ್ನಿಸಿದ್ದರು.
ನ್ಯಾ. ನಾಗಪ್ರಸನ್ನ: ಮಾತನಾಡಿದ ವಿಷಯಕ್ಕೂ ಶಾಸಕಾಂಗಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದರು.ಆಗ ಸೀತಾ ಸೊರೇನ್ ಹಾಗೂ ಕೇಂದ್ರ ಸರ್ಕಾರದ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ನಾವದಗಿ ಉಲ್ಲೇಖಿಸಿದ್ದರು. ಸಂವಿಧಾನದ ಆರ್ಟಿಕಲ್ 194(2) ರ ಅನ್ವಯ ಸದನದಲ್ಲಿದ್ದಾಗ ಸದಸ್ಯರು ಅಲ್ಲಿನ ಕಾನೂನು ವ್ಯಾಪ್ತಿಗೇ ಬರುತ್ತಾರೆ. ಪರಿಸ್ಥಿತಿಯ ಆಧಾರದ ಮೇಲೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದರು. ಆರ್ಟಿಕಲ್ 194(2) ಶಾಸಕನಿಗೆ ನಿರ್ಭೀತಿಯಿಂದ ಮಾತನಾಡಲು ಅವಕಾಶ ನೀಡುತ್ತದೆ. ಅವರಿಗೆ ಸದನದ ಒಳಗೆ ಸಂಪೂರ್ಣ ಹಕ್ಕಿದೆ ಎಂದಿದ್ದರು.
ನ್ಯಾಯಮೂರ್ತಿ: ಏನನ್ನೂ ಮಾತನಾಡಲು ಸಂಪೂರ್ಣ ಸ್ವಾತಂತ್ರ್ಯ ಇದಯೇ? ಈ ಪ್ರಕರಣದಲ್ಲಿ ಆಡಿದ್ದಾರೆ ಎನ್ನಲಾದ ಮಾತುಗಳನ್ನೂ ಆಡಬಹುದೇ ಎಂದು ಪ್ರಶ್ನಿಸಿದ್ದರು.
ನಾವದಗಿ: ಮಾತನಾಡಿದ ವಿಷಯವನ್ನು ಕಾನೂನಿನಡಿಯಲ್ಲಿ ದೂಷಣೆ ಎಂದು ಪರಿಗಣಿಸಿದರೂ, ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ಸದನ ಹೊಂದಿರುತ್ತದೆ ಮತ್ತು ಯಾವುದೇ ಬಾಹ್ಯ ಸಂಸ್ಥೆ ಅಲ್ಲ ಎಂದು ನಾವದಗಿ ವಾದ ಮಂಡಿಸಿದರು.
ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಪ್ರಕ್ರಿಯೆಗಳ ಮೇಲೆ ವಿಧಿಸಲಾದ ತಡೆಯಾಜ್ಞೆಯನ್ನು ತೆರವು ಮಾಡಲು ಎಸ್ಪಿಪಿ ನ್ಯಾಯಾಲಯವನ್ನು ಮನವಿ ಮಾಡಿದರು. ಹೈಕೋರ್ಟ್ ಆದೇಶದ ಕಾರಣ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕೈಗಳನ್ನು ಕಟ್ಟಿಹಾಕಿದಂತಾಗಿದೆ. ಸಿಟಿ ರವಿ ಅವರ ವಾಯ್ಸ್ ಸ್ಯಾಂಪಲ್ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿ ಬಾಕಿ ಇದೆ ಎಂದ್ದಿದ್ದರು.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪವಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು.ಘಟನೆ ರಾಜ್ಯದಾದ್ಯಂತ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಸಿಟಿ ರವಿ ಅವರನ್ನು ಬಂಧಿಸಿದ್ದ ಬೆಳಗಾವಿ ಪೊಲೀಸರು ರಾತ್ರಿ ಇಡೀ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಡಿಸಿದ್ದರು. ಈ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು. ಟಿ ರವಿ ಅವರನ್ನು ಎನ್ಕೌಂಟರ್ ಮಾಡಲು ಸರ್ಕಾರ ಸಂಚು ಹೂಡಿತ್ತು ಎಂದು ಕೆಲವು ಮಂದಿ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದರು.